ಕೋವಿಡ್-19 ನಿಯಂತ್ರಣ ಸರಕಾರದ ಮೊದಲ ಆದ್ಯತೆ:ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲು ಕಾರಜೋಳ ಸೂಚನೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಬಾಗಲಕೋಟೆ :ಸರ್ಕಾರದ ಮೊದಲ ಆದ್ಯತೆ ಕೋವಿಡ್ 19 ನಿಯಂತ್ರಣವಾಗಿದ್ದು, ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನೊಳಿಸುವ ಮೂಲಕ ಕೋವಿಡ್ 19 ನಿಯಂತ್ರಣಕ್ಕೆ ಮತ್ತಷ್ಟು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು ಬಾಗಲಕೋಟೆ ಜಿಲ್ಲಾಡಳಿತಕ್ಕೆ ಕೋವಿಡ್ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕ್ಕಾಗಿ ಸೂಚಿಸಿದ್ದಾರೆ. ಗುಳೆಹೋದ ಜನ ಮರಳಿ ತಮ್ಮ ತಮ್ಮ ಊರುಗಳಿಗೆ ಹಿಂದಿರುಗುತ್ತಿದ್ದು, ಅವರಿಗೆ ಪ್ರತಿ ಗ್ರಾಮದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅವಶ್ಯಕತೆ ಇದ್ದವರೆಲ್ಲರಿಗೂ ಕಡ್ಡಾಯವಾಗಿ ಉದ್ಯೋಗ ಕೊಡುವಂತೆ ಕ್ರಮಕೈಗೊಳ್ಳಲು ತಿಳಿಸಿದ್ದಾರೆ.
ಕೋವಿಡ್ ಹೆಚ್ಚಾಗಿ ಹರಡುತ್ತಿರುವ ಗ್ರಾಮಗಳಲ್ಲಿ ಯಾವ ಕಾರಣಕ್ಕಾಗಿ ಹರಡುತ್ತಿದೆ ಎನ್ನುವುದನ್ನು ಪತ್ತೆಹಚ್ಚಲು ಗ್ರಾಮಗಳಲ್ಲಿ ಕಾರ್ಯಪಡೆಗಳನ್ನು ಕಡ್ಡಾಯವಾಗಿ ರಚನೆ ಮಾಡಿ ನಿಯಂತ್ರಿಸಲು ಕ್ರಮಜರುಗಿಸಬೇಕು. ತರಕಾರಿ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಎಲ್ಲಾ ವಾರ್ಡುಗಳಲ್ಲಿ ಸುಲಲಿತವಾಗಿ ತರಕಾರಿ ದೊರಕುವಂತೆ ವ್ಯವಸ್ಥೆ ಕಲ್ಪಿಸಬೇಕು. ವಿನಾಕಾರಣ ಜನರನ್ನು ಭಯಭೀತರನ್ನಾಗಿ ಮಾಡಲು ಕೆಲವರು ಸುಳ್ಳುಸುದ್ದಿಗಳನ್ನು/ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಲು ಸೂಚಿಸಿದರು.
ರೆಮಿಡಿಸಿವಿರ್ ಚುಚ್ಚುಮದ್ದು ಅನ್ನು ಅವಶ್ಯಕತೆಗನುಗುಣವಾಗಿ ಸರ್ಕಾರ ಪೂರೈಕೆ ಮಾಡುತ್ತಿದೆ. ಕೆಲವರು ಕೃತಕ ಅಭಾವ ಸೃಷ್ಠಿಮಾಡಲು ಪ್ರಯತ್ನಮಾಡುತ್ತಿದ್ದಾರೆ. ಕಾಳಸಂತೆಯಲ್ಲಿ ಈ ಚುಚ್ಚುಮದ್ದನ್ನು ಮಾರಾಟಮಾಡಲು ಪ್ರಯತ್ನಮಾಡುತ್ತಿದ್ದಾರೆ. ಅಂತಹವರ ಬಗ್ಗೆ ಹೆಚ್ಚು ತೀವ್ರ ನಿಗಾವಹಿಸಲು ಪೆÇಲೀಸರು ಎಚ್ಚರವಹಿಸಿ, ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಎಲ್ಲಾ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿ, ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕ್ರಮಕೈಗೊಂಡು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬೆಡ್ (ಹಾಸಿಗೆ) ಲಭ್ಯತೆ ಮಾಹಿತಿಯನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ನೀಡಬೇಕು. ಜಿಲ್ಲೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಮಾಹಿತಿ ಸಂಗ್ರಹಿಸುವುದು. ಆಕ್ಸಿಜನ್ ಲಭ್ಯತೆಯ ಮಾಹಿತಿ ಸಂಗ್ರಹಿಸುವುದು ಮತ್ತು ಕೊರತೆಯಾಗದಂತೆ ಎಚ್ಚರ ವಹಿಸುವುದು. ಕಡ್ಡಾಯವಾಗಿ ವಲಸಿಗರ ಮಾಹಿತಿ ಸಂಗ್ರಹಿಸುವುದು. ಅವಶ್ಯವಿರುವ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಕೋವಿಡ್-19 ನಿಯಂತ್ರಣ ಕರ್ತವ್ಯಕ್ಕೆ ನಿಯೋಜಿಸಿ, ಸಕ್ರಿಯವಾಗಿ ಕಾರ್ಯನಿರ್ವಹಿಸಲು ಕ್ರಮಕೈಗೊಳ್ಳಳು ಸೂಚಿಸಿದ್ದಾರೆ.
ಕೋವಿಡ್ ಸೊಂಕಿತ ರೋಗಿಗಳಿಗೆ ಹಾಸಿಗೆ ಕೊರತೆಯಾಗದಂತೆ ವಸತಿ ಶಾಲೆ, ವಸತಿ ನಿಲಯಗಳನ್ನು ಸಜ್ಜುಗೊಳಿಸಿ ಆಸ್ಪತ್ರೆಯ ಅನೆಕ್ಸ್ ಕಟ್ಟಡವೆಂದು ಗುರುತಿಸಿ. ಸೌಲಭ್ಯ ಕಲ್ಪಿಸಬೇಕು. ಸಣ್ಣ-ಸಣ್ಣ ಮನೆ ಇದ್ದವರಿಗೆ ಕ್ವಾರಂಟೈನ್‍ನಲ್ಲಿಡುವ ಪರಿಸ್ಥಿತಿ ಎದುರಾದರೆ ವಸತಿ ನಿಲಯ, ವಸತಿ ಶಾಲೆಗಳಲ್ಲಿ ಕ್ವಾರಂಟೈನ್‍ನಲ್ಲಿಟ್ಟು ಆರೈಕೆ ಮಾಡಬೇಕು. ಹೋಬಳಿ ಮಟ್ಟದಲ್ಲಿ ಸಾರ್ವಜನಿಕರ ಸಲಹಾ ಸಮಿತಿ ರಚಿಸಿ, ಸರ್ಕಾರದ ಮಾರ್ಗಸೂಚಿಗಳ ಅನುಷ್ಟಾನದ ಬಗ್ಗೆ ಪಾರದರ್ಶಕತೆ ಇರುವಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಬೇಕು. ಜಿಲ್ಲಾಡಳಿತವು ಈ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಅನುಪಾಲನಾ ವರದಿಯನ್ನು ಸಲ್ಲಿಸಲು ಕಾರಜೋಳ ಸೂಚಿಸಿದ್ದಾರೆ.

Be the first to comment

Leave a Reply

Your email address will not be published.


*