ರಾಜ್ಯ ಸುದ್ದಿಗಳು
ದೇವನಹಳ್ಳಿ
ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮ ಪಂಚಾಯಿತಿ ಪಿಡಿಒ ರಾಜಗೋಪಾಲರೆಡ್ಡಿ ವಯೋಸಹಜವಾಗಿ ನಿವೃತ್ತಿ ಹೊಂದಿದ್ದಾರೆ. ಇನ್ನೂ ಅದೇ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಕ್ಷ್ಮೀಪತಿ ಸಹ ಬೂದಿಗೆರೆ ಗ್ರಾಮ ಪಂಚಾಯಿತಿಯಿಂದ ನಿವೃತ್ತಿ ಹೊಂದಿದ್ದಾರೆ.ಈ ಇಬ್ಬರೂ ಅಧಿಕಾರಿಗಳಿಗೆ ಬೂದಿಗೆರೆ ಗ್ರಾಮದ ಸಮಾಜ ಸೇವಕ ಮುನಿರಾಜ್ ಅವರು ಸನ್ಮಾನ ನಡೆಸಿ ಅಭಿನಂದನೆ ಸಲ್ಲಿಸಿದ್ದಾರೆ.ಇದೇ ವೇಳೆ ಮಾತನಾಡಿದ ನಿರ್ಗಮಿತ ಪಿಡಿಒ ರಾಜಗೋಪಾಲರೆಡ್ಡಿ, ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 4 ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿರುವುದು ಆತ್ಮ ತೃಪ್ತಿ ತಂದಿದೆ. ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಶ್ರಮ ವಹಿಸಿದ್ದೇನೆ. ಇನ್ನೂ ಕೋವಿಡ್ ಅಂತಹ ಪರಿಸ್ಥಿತಿಯಲ್ಲಿ ನಮ್ಮ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಗಲಿರುಳು ದುಡಿದಿದ್ದಾರೆ. ಇನ್ನೂ ಸರ್ಕಾರಿ ಸೇವೆ ಸಲ್ಲಿಸುವ ಅಧಿಕಾರಿಗಳಿಗೆ ನಿವೃತ್ತಿ ಸಹಜ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನರ ತೆರಿಗೆ ಹಣದಿಂದ ಗ್ರಾಮಗಳ ಅಭಿವೃದ್ಧಿ, ಸ್ವಚ್ಚತೆ , ನೈರ್ಮಲ್ಯ ಕಾಪಾಡಬೇಕಾಗುತ್ತದೆ. ಅದನ್ನು ನಾವು ಶ್ರದ್ಧೆಯಿಂದ ಮಾಡಿದ್ದೇವೆ. ಈ ಎಲ್ಲ ಕಾರ್ಯಕ್ಕೂ ಬೂದಿಗೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಯದರ್ಶಿ ಲಕ್ಷ್ಮೀಪತಿ ಸಹ ಸಹಕಾರ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಸಮಾಜ ಸೇವಕ ಮುನಿರಾಜು, ಬೂದಿಗೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಗೋಪಾಲರೆಡ್ಡಿ ಮತ್ತು ಕಾರ್ಯದರ್ಶಿ ಲಕ್ಷ್ಮೀಪತಿ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಗ್ರಾಮದಲ್ಲಿ ಕೆಲ ಸಂದರ್ಭಗಳಲ್ಲಿ ಅಧಿಕಾರಿಗಳಿಗೆ ಅಕ್ರಮ ಮಾಡಲು ಒತ್ತಡ ಹಾಕಿದ್ದ ಸಂದರ್ಭದಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗದೆ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಇನ್ನೂ ಸರ್ಕಾರಿ ಕೆಲಸ ಮಾಡುವ ಅಧಿಕಾರಿಗಳ ಆರೋಪ ಬರುವುದು ಸಹಜ ಅದನ್ನು ಮೀರಿ ಕೆಲಸ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.ಇದೇ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಶ್ರೀನಿವಾಸ್,ಬಲಿಜ ಸಂಘದ ಜನಾರ್ಧನ್,ಯುವ ಮುಖಂಡ ಉಮೇಶ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೋಜ್, ಮುನಿರಾಜು,ಮಂಜುಳಾ ಮತ್ತಿತರರಿದ್ದರು.
Be the first to comment